ನೆಲದ ಮಾತು

ಮೇರಾ ಹೋ ಮನ್ ಸ್ವದೇಶಿ….

Posted in ದಿಲ್ ಹೈ ಹಿಂದೂಸ್ಥಾನಿ by Chakravarty on December 7, 2007

ಸ್ವದೇಶಿ ಎನ್ನುವುದು ಸಂಕುಚಿತ ಭಾವನೆ ಅಂತ ಕೆಲವರು ವಾದ ಹೂಡೋದನ್ನ ನಾನು ಕೇಳಿದ್ದೇನೆ. ಖಂಡಿತ ಅದು ತಪ್ಪು. ಸ್ವದೇಶೀಯತೆ ಕೇವಲ ಭಾವನೆಗೆ ಸೀಮಿತವಲ್ಲ. ಅದೊಂದು ವ್ಯವಸ್ಥೆ. ’ಸ್ವದೇಶಿ’ ಅಂದರೆ ವಿಶ್ವವೆಲ್ಲವೂ ಒಂದಾಗಿ ಸಂತೋಷದಿಂದ ಇರಬೇಕೆನ್ನುವ ವಿಶ್ವ ಮಾನವ ಧರ್ಮದ ವಿಕೇಂದ್ರೀಕೃತ ರೂಪ.

spinning.jpg

ಈ ವಿಶ್ವ ಮಾನವ ಧರ್ಮದ ಮೊದಲ ಹೆಜ್ಜೆ ಸ್ವಾರ್ಥ. ಇಲ್ಲಿ ಸ್ವಾರ್ಥ ಅಂದರೆ ತಮ್ಮ ತಮ್ಮ ಅಗತ್ಯಗಳನ್ನು ಪೂರೈಸಿಕೊಂಡು ಸ್ವಾವಲಂಬಿಗಳಾಗುವುದು ಅನ್ನುವ ವಿಸ್ತೃತಾರ್ಥವಿದೆ. ಇದು ಮೊದಲು ವೈಯಕ್ತಿಕ, ನಂತರ ಕುಟುಂಬ, ಆ ಮೂಲಕ ರಾಷ್ಟ್ರದ ಸ್ವಾರ್ಥವಾಗಿ ಮಾರ್ಪಡುತ್ತದೆ. ನಮ್ಮ ದೇಶ ಮೊದಲು ಸ್ವಾವಲಂಬಿಯಾಗಬೇಕು. ಆಗ ಇತರ ದೇಶಗಳ ಬಗ್ಗೆ, ಇಡಿಯ ಜಗತ್ತಿನ ಬಗ್ಗೆ ಚಿಂತಿಸಲು ಅರ್ಹತೆ ದೊರೆಯುತ್ತದೆ. ಇದು ಪ್ರತಿಯೊಂದು ದೇಶಕ್ಕೂ ಅನ್ವಯಿಸುವ ಮಾತು. ಸ್ವದೇಶಿ ಚಿಂತನೆ ರಾಷ್ಟ್ರದೊಳಗಿನ ಬಾಂಧವ್ಯವನ್ನು ಬೆಸೆಯಲು, ಒಗ್ಗಟ್ಟು ಮೂಡಿಸಲು ಸಹಕಾರಿ. ನಮ್ಮ ಅಗತ್ಯಗಳಿಗೆ ನಾವು ನಮ್ಮದೇ ಜನರನ್ನು ಅವಲಂಬಿಸುವುದೇ ಸ್ವದೇಶಿ. ನಮ್ಮ ಆಚಾರ ವಿಚಾರ, ಸಂಸ್ಕೃತಿ ಸಂಪ್ರದಾಯಗಳಿಗೆ ಧಕ್ಕೆ ಬಾರದ ರೀತಿಯಲ್ಲಿ ರೂಢಿಸಿಕೊಳ್ಳುವ ಜೀವನ ಶೈಲಿ- ಸ್ವದೇಶಿ. ರಾಷ್ಟ್ರದ ಆರ್ಥಿಕತೆ, ಸಮಾಜದ ಎಲ್ಲ ವರ್ಗದ ಉನ್ನತಿಗಾಗಿ ಮನಸಾ ಬಯಸುವುದೂ ಸ್ವದೇಶೀಯತೆಯೇ. ಸ್ವದೇಶಿ ಚಿಂತನೆ ಅಂಧಾಭಿಮಾನವಲ್ಲ. ಅದು ದೂರ ದೃಷ್ಟಿಯ ಪ್ರತೀಕ. ರಾಷ್ಟ್ರ ಚಿಂತನೆಯ ವೈಶಾಲ್ಯತೆಯ, ಕಾಳಜಿಯ ಕ್ರಿಯಾ ರೂಪ.

ನಮ್ಮ ಆಂತರ್ಯದಲ್ಲೇನೋ ಸ್ವದೇಶಿ ಚಿಂತನೆಗಳಿರುತ್ತದೆ. ಆದರೂ ಕೆಲವು ಬಾರಿ ನಮಗೆ ಸಂಪೂರ್ಣವಾಗಿ ಈ ಶೈಲಿಯನ್ನು ಅನುಸರಿಸುವುದು ಸಾಧ್ಯವಾಗುವುದಿಲ್ಲ. ಮಾರುಕಟ್ಟೆಯಲ್ಲಿ ತುಂಬಿಕೊಂಡ ವಿದೇಶಿ ವಸ್ತುಗಳು ನಮ್ಮ ಮನೆ ತುಂಬುತ್ತಿರುತ್ತವೆ. ಇದಕ್ಕೆ ನಮ್ಮ ದೇಶದಲ್ಲೇ ತಯಾರಾಗುತ್ತಿರುವ ವಸ್ತುಗಳ ಬಗ್ಗೆ ಸರಿಯಾದ ಮಾಹಿತಿಯಿಲ್ಲದಿರುವುದೊಂದು ಕಾರಣವಾದರೆ, ಮನಸೂರೆಗೊಳ್ಳುವ ಜಾಹೀರಾತುಗಳು ನಮ್ಮನ್ನು ಮರುಳು ಮಾಡಿ ವಿದೇಶಿ ವಸ್ತುಗಳ ಕಡೆಗೆಗಮನ ಸೆಳೆಯುತ್ತವೆ. ಇಂತಹ ಜಾಹೀರಾತುಗಳಿಗಾಗಿ ಬಹುರಾಷ್ಟ್ರೀಯ ಕಂಪೆನಿಗಳು ಕೋಟ್ಯಂತರ ರೂಪಾಯಿಗಳಷ್ಟು ಹಣ ಚೆಲ್ಲುತ್ತವೆಂದರೆ, ಅವು ನಮ್ಮಿಂದ ಕೊಳ್ಳೆ ಹೊಡೆಯುವ ಲಾಭವೆಷ್ಟಿರಬಹುದು, ನೀವೇ ಊಹಿಸಿ ನೋಡಿ!

ಜಾಗತೀಕರಣದ ರೀತಿನೀತಿಗಳು ಈ ಕಂಪೆನಿಗಳೊಂದು ವರದಾನ. ಹಾಗೆ ನೋಡಿದರೆ ಜಾಗತೀಕರಣ ಎನ್ನುವ ಪದ ಹುಟ್ಟಿಕೊಂಡಿದ್ದೇ ಮುಂದುವರಿದ ರಾಷ್ಟ್ರಗಳ ಜನರು ತಿರಸ್ಕರಿಸಿದ ವಸ್ತುಗಳಿಗೊಂದು ಮಾರುಕಟ್ಟೆ ಒದಗಿಸಲಿಕ್ಕೆ! ಜಾಗತೀಕರಣದ ಹೆಸರಲ್ಲಿ ಇಂದು ವಿಶ್ವದ ನೂರಾರು ರಾಷ್ಟ್ರಗಳು ಪ್ರಬಲ ರಾಷ್ಟ್ರಗಳ ಕೈಗೆ ಸಿಕ್ಕು ನಲುಗುತ್ತಿವೆ. ಅವುಗಳ ಮೇಲೆ ಸವಾರಿ ನಡೆಸಲು ವರ್ಲ್ಡ್ ಬ್ಯಾಂಕ್ ಸಾಲದ ಆಮಿಷ ಬೇರೆ.

ಈ ರಾಷ್ಟ್ರಗಳು ತೃತೀಯ ಜಗತ್ತಿನೊಳಗೆ ಕಾಲಿಡೋದು, ನಾವು ಉನ್ನತ ತಂತ್ರಜ್ಞಾನ ಕೊಡ್ತೇವೆ ಎಂದು ಹೇಳುವ ಮೂಲಕ. ಅವುಗಳು ಒಡ್ಡುವ ಆಮಿಷಕ್ಕೆ ಬಲಿಯಾದ ರಾಜಕಾರಣಿಗಳು, ವಿದೇಶಿ ಕಂಪೆನಿಗಳು ಬಂದರೆ ದೇಶಕ್ಕೆ ತಂತ್ರಜ್ಞಾನ ಹರಿದು ಬರುತ್ತೆ ಎನ್ನುತ್ತ ಕೆಂಪು ಹಾಸಿನ ಸ್ವಾಗತ ನೀಡುತ್ತಾರೆ. ಹೀಗೆ ಈ ವರೆಗೆ ಭಾರತದ ಒಳ ನುಸುಳಿರುವ ಕಂಪೆನಿಗಳಲ್ಲಿ ಶೇ.೮೦ರಶ್ಟು ಕಂಪೆನಿಗಳು ಶೂನ್ಯ ತಂತ್ರಜ್ಞಾನ ಕ್ಷೇತ್ರದ್ದು! ಅವು ನಮಗೆ ಮಾರುತ್ತಿರುವುದು ಸಾಫ್ಟ್ ಡ್ರಿಂಕ್ಸ್, ಚಿಪ್ಸ್, ಸೋಪ್ ಇತ್ಯಾದಿ ಕೆಲಸಕ್ಕೆ ಬಾರದ ಉತ್ಪನ್ನಗಳನ್ನು!! ಈ ಯಾವ ಕಂಪೆನಿಯೂ ನಮಗೆ ಅಗತ್ಯವಾಗಿರುವ ಸಂಪರ್ಕ ತಂತ್ರಜ್ಞಾನವನ್ನಾಗಲೀ ಪರಮಾಣು ತಂತ್ರಜ್ಞಾನವನ್ನಾಗಲೀ ಜೈವಿಕ- ರಾಸಾಯನಿಕ ತಂತ್ರಜ್ಞಾನವಾಗಲೀ ಈ ಯಾವುದನ್ನೂ ಕೊಡುತ್ತಿಲ್ಲ. ಇಂದು ನಮಗೆ ಬಣ್ಣದ ಬಾಟಲಿಗಳಲ್ಲಿ ವಿಷ ಕುಡಿಸುತ್ತಿರುವ ಕೋಕ್ ಕಂಪೆನಿ ಭಾರತಕ್ಕೆ ರಿ ಎಂಟ್ರಿ ಪಡೆದಿದ್ದು ತರಕಾರಿ ಸಂಸ್ಕರಣಾ ಘಟಕ ತೆರೆಯುತ್ತೇವೆ ಎಂಡು ಹೇಳಿಕೊಂಡು. ಅದರಂಥ ಕಂಪೆನಿಗಳೆಲ್ಲವೂ ನಮ್ಮ ದೇಶದೊಳಗೆ ನುಸುಳಿ ನಮ್ಮ ಮಾರುಕಟ್ಟೆ ಮಾತ್ರವಲ್ಲ, ರಾಜಕೀಯದಲ್ಲೂ ಹಸ್ತಕ್ಷೇಪ ಮಾಡುತ್ತಿವೆ. ನಮ್ಮ ಲಘು ಉದ್ಯೋಗಗಳಿಗೆ, ಕೃಷಿ ಕ್ಷೇತ್ರಕ್ಕೆ ನಿರಂತರ ಪ್ರಹಾರ ನೀಡುತ್ತಲೇ ಇವೆ.

ಉದಾಹರಣೆಗೆ ನೋಡಿ: ಒಂದು ಅಂದಾಜಿನ ಪ್ರಕಾರ ಹಾಲೆಂಡ್ ಮೂಲದ ಬಹು ರಾಷ್ಟ್ರೀಯ ಕಂಪೆನಿ ಹಿಂದೂಸ್ಥಾನ್ ಲೀವರ್ ತಯಾರಿಸುವ ಉತ್ಪಾದನೆಯನ್ನು ಕೇವಲ ಕರ್ನಾಟಕದ ಜನತೆ ಖರೀದಿಸುವುದನ್ನು ಬಿಟ್ಟು ಸ್ವದೇಶಿ ವಸ್ತುಗಳ ಖರೀದಿಗೆ ತೊಡಗಿದರೂ ಸುಮಾರು ೫೦ ಸಾವಿರ ಜನರಿಗೆ ಉದ್ಯೋಗಾವಕಾಶ ಸೃಷ್ಟಿಯಾಗುತ್ತದೆ. ಹೀಗಿರುವಾಗ ಇಡಿಯ ದೇಶ ಈ ಕಂಪೆನಿಯ ವಸ್ತುಗಳನ್ನು ಬಹಿಷ್ಕರಿಸಿದರೆ ಎಷ್ಟು ಲಕ್ಷ ಜನರಿಗೆ ಉದ್ಯೋಗ ದೊರೆಯುತ್ತದೆ ಯೋಚಿಸಿ… ಇಂಥಹ ನೂರಾರು ಕಂಪೆನಿಗಳು ಭಾರತದಲ್ಲಿವೆ. ಹೀಗೆ ಅವುಗಳ ಎಂಟ್ರಿಯಾದ ಮೇಲೆ ನಮ್ಮ ಅದೆಷ್ಟು ಕೈಗಾರಿಕೆಗಳು ಬಾಗಿಲು ಮುಚ್ಚಿವೆ ಎಂದು ನೀವೇ ಲೆಕ್ಕ ಹಾಕಿ.

ನಾವು ವಿದೇಶಿ ಕಂಪೆನಿಗಳನ್ನು ತಿರಸ್ಕರಿಸಬೇಕೆನ್ನುವುದು ಇದೇ ಕಾರಣಕ್ಕೆ. ಪ್ರತಿಯೊಬ್ಬರಿಗೂ ಪ್ರತಿಯೊಂದನ್ನೂ ರಾಷ್ಟ್ರದ ಮಟ್ಟದಲ್ಲಿ ಯೋಚಿಸೋದು ಸಾಧ್ಯವಾಗೋಲ್ಲ. ಆದರೆ ತನ್ನ ವೈಯಕ್ತಿಕ ಮಟ್ಟದಿಂದಲೇ ರಾಷ್ಟ್ರ ಮಟ್ಟದ ಚಿಂತನೆ ನಡೆಸಬಹುದು. ಅದಕ್ಕಾಗಿ ವ್ಯಕ್ತಿಯೊಬ್ಬ ತನ್ನ ಆರ್ಥಿಕತೆ, ಸಂಸ್ಕೃತಿ, ತನ್ನ ಕುಟುಂಬ ಮತ್ತು ತನ್ನ ಆರೋಗ್ಯ ಇವಿಷ್ಟರಲ್ಲೂ ಸ್ವಾವಲಂಬನೆಯಿಂದ ಸಮಗ್ರ ಸುಧಾರಣೆಗೆ ಪ್ರಯತ್ನಿಸುವಂತಾಗಬೇಕು. ಆಗದೇ?

ಕಂಡವರ ದುಡ್ಡಿಗೆ, ಜೀವಕ್ಕೆ ಬೆಲೆಯೇ ಇಲ್ವಾ?

Posted in ನಮ್ಮ ನಮ್ಮ ನಡುವೆ by Chakravarty on December 1, 2007

ಇವತ್ತಿನ ಸುದ್ದಿ ಕೇಳಿದಿರಾ?
ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಏಯ್ಡ್ಸ್ ರೋಗಿಗಳಿಗೆ ಕೊಡುವ ಔಷಧದಲ್ಲಿ ಹೇರಾಫೇರಿ ನಡೆಯುತ್ತಿದೆ. ವಿದೇಶೀ ಔಷಧ ಕಂಪೆನಿಗಳ ಎಕ್ಸ್ ಪೆರಿಮೆಂಟಿಗೆ ನಮ್ಮ ಜನರು ಬಲಿಪಶುಗಳಾಗ್ತಿದಾರೆ.
ಮೊನ್ನೆ ’ಔಷಧ ಮಾರುಕಟ್ಟೆಯಲ್ಲಿ ಬಿಕರಿಯಾಗುವ ಜೀವಗಳು’ ಲೇಖನವನ್ನೋದಿದ ಕೆಲವು ಪರಿಚಿತರು, “ನೀವು ಹೇಳುವಷ್ಟೆಲ್ಲ ಕುಲಗೆಟ್ಟುಹೋಗಿಲ್ಲ ಬಿಡ್ರಿ! ಸುಮ್ನೆ ಎಲ್ಲಾವ್ದನ್ನೂ ಎಕ್ಸಾಸಿರೇಟ್ ಮಾಡ್ತೀರ” ಅಂದುಬಿಟ್ಟಿದ್ದರು. ಆಗ ನಾನು ತೀರ ನನ್ನ ಸುತ್ತ ಮುತ್ತಲೇ ನಡೆದ ಕೆಲವು ಘಟನೆಗಳನ್ನ ಹೇಳಿ ವಿಷಯದ ಗಂಭೀರತೆಯನ್ನ ಮನದಟ್ಟು ಮಾಡಿಸಬೇಕಾಯ್ತು. ಮತ್ತಿವತ್ತು ಬಂದಿದೆ ಈ ಆಘಾತಕಾರಿ ಸುದ್ದಿ.

ಖಾಸಗಿ ವೈದ್ಯರದೊಂದು ರೀತಿಯ ಹಗಲು ದರೋಡೆಯಾದರೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಮತ್ತೊಂದು ಬಗೆಯ ಕಳ್ಳತನ.
ಒಂದು ವರ್ಷದ ಹಿಂದಿನ ಮಾತು. ನನ್ನ ಊರು ಹೊನ್ನಾವರದಲ್ಲಿ,  ಅಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಕ್ಷಯ ರೋಗಕ್ಕೆ ಮಾತ್ರೆಗಳನ್ನ ಹಂಚುತ್ತಿದ್ದರು. ಪಾಪ ಊರ ಜನ ತುಂಬ ಶ್ರದ್ಧೆಯಿಂದ ಅದನ್ನು ತೆಗೆದುಕೊಳ್ಳುತ್ತಿದ್ದರು.
ವಾರ, ತಿಂಗಳು… ಊಹೂಂ… ಎಷ್ಟು ದಿನ ಕಾದರೂ ಫಲಿತಾಂಶ ಮಾತ್ರ ಸೊನ್ನೆ!
ಆ ಊರಿನ ಒಬ್ಬ ಕುತೂಹಲಿ ಯುವಕ ಆ ಕ್ಯಾಪ್ಸೂಲನ್ನು ಸುಮ್ಮನೆ ನುಂಗದೆ, ಅದನ್ನ ಬಿಚ್ಚಿ ನೋಡಿದ. ಅದರಲ್ಲೇನಿತ್ತು ಮಣ್ಣು!? ಪೂರ್ತಿ ಖಾಲಿ!!
ಊರವರೆಲ್ಲ ಸೇರಿದರು. ಆಸ್ಪತ್ರೆಯಲ್ಲಿದ್ದ ಅಷ್ಟೂ ಕ್ಷಯದ ಮಾತ್ರೆಗಳನ್ನ ನೋಡಲಾಯ್ತು. ಎಲ್ಲವೂ ಹಾಗೇ ಖಾಲಿ ಖಾಲಿಯಾಗಿ ಬಾಯಿ ಕಳೆದುಕೊಂಡುಬಿದ್ದಿದ್ದವು!
ಅಷ್ಟೂ ದಿನ ನಂಬಿಕೆಯಿಂದ ಮಾತ್ರೆಗಳನ್ನ ನುಂಗಿದ್ದ ಜನರಿಗೆ ಎಂಥ ಆಘಾತವಾಗಿರಬೇಡ ಹೇಳಿ?

ಮತ್ತೊಂದು ಇಂಥದೇ ಕೇಸು. ಇದನ್ನ, ಲೇಖನ ಓದಿದ ನನ್ನ ಗೆಳೆಯ ರಾಜೇಶ ಹೇಳಿದ್ದು.
ಆತನ ಅಕ್ಕನಿಗೆ ಹೊಟ್ಟೆ ನೋವು ಅಂತ ದೊಡ್ಡ ನರ್ಸಿಂಗ್ ಹೋಮ್ ಒಂದಕ್ಕೆ ಕರೆದುಕೊಂಡು ಹೋಗಿದ್ದರು. ಸ್ಕ್ಯಾನ್ ಮಾಡಿ ಅವರನ್ನ ಹೊರಗೆ ಹತ್ತು ನಿಮಿಷ ಕಾಯಿಸಿ, ’ಅಪೆಂಡಿಸೈಟಿಸ್’ ಅಂತ ರಿಪೋರ್ಟು ಕೊಟ್ಟರು. ಆಪರೇಷನ್ನೇ ಗತಿ! ಮಗು ಇನ್ನೂ ಸಣ್ಣದು. ನೋಡೀಕೊಳ್ಳೋರ್ಯಾರು?
ರಾಜೇಶ ಕೊಂಚ ತಲೆ ಓಡಿಸಿ, ಇನ್ನೂ ಆರಂಭದ ಹಂತದ್ದಾದ್ದರಿಂದ ಸಧ್ಯಕ್ಕೆ ಆಪರೇಷನ್ನು ಬೇಡವೆಂದ. ಮತ್ತೆ ನೋವು ಹೆಚ್ಚಾದರೆ ಆಸ್ಪತ್ರೆಗೆ ಬರುವುದು ಅಂದುಕೊಂಡು ಮನೆ ದಾರಿ ಹಿಡಿದರು.

ಅದಾಗಿ ಒಂದೆರಡು ತಿಂಗಳು ಆಕೆಗೆ ಹೊಟ್ಟೆ ನೋವು ಬರಲೇ ಇಲ್ಲ. ಮತ್ತೊಮ್ಮೆ ರಾಜೇಶ ಮನೆ ಬಳಿಯ ವೈದ್ಯರ ಹತ್ತಿರ ಆಕೆಯನ್ನ ಕರೆದುಕೊಂಡು ಹೋಗಿ ಅಪೆಂಡಿಕ್ಸ್ ಯಾವ ಹಂತದಲ್ಲಿದೆ ಎಂದು ವಿಚಾರಿಸಿದರೆ, ಅವರು ಅಚ್ಚರಿಪಟ್ಟುಬಿಟ್ಟರು. ಅಸಲಿಗೆ ಆಕೆಗೆ ಅಪೆಂಡಿಕ್ಸ್ ಇಲ್ಲವೇ ಇಲ್ಲವೆಂದೂ, ಯಾರದೋ ರಿಪೋರ್ಟ್ ಅವರಿಗೆ ತೋರಿಸಲಾಗಿದೆಯೆಂದೂ ಆ ವೈದ್ಯರು ಹೇಳಿದಾಗ ಅಚ್ಚರಿಯಾಗುವ ಸರದಿ ರಾಜೇಶ ಮತ್ತವನ ಅಕ್ಕನದು! ಈ ಒಟ್ಟು ಘಟನೆ ನಡೆದು ಆರು ವರ್ಷಗಳಾಗಿವೆ. ರಾಜೇಶನ ಅಕ್ಕ, ಒಂದಷ್ಟು ಗ್ಯಾಸ್ಟ್ರಿಕ್ ಸಮಸ್ಯೆ ಹೊರತುಪಡಿಸಿದರೆ, ಆರಾಮಾಗಿಯೇ ಇದ್ದಾರೆ!

ದೊಡ್ಡ ಆಸ್ಪತ್ರೆಯ ಡಾಕ್ಟ್ರುಗಳನ್ನ ನೆಚ್ಚಿಕೊಂಡು ಆಪರೇಷನ್ನಿಗೆ ಸಮ್ಮತಿಸಿದ್ದರೆ, ಏನೂ ಸಮಸ್ಯೆಯಿಲ್ಲದ ಹೊಟ್ಟೆ ಕೊಯ್ದು ಅವರೇನು ಮಾಡುತ್ತಿದ್ದರು?
ಕಿಡ್ನಿ ಕದಿಯುತ್ತಿದ್ದರೇ? ಅರಿವಳಿಕೆ ಕೊಟ್ಟು ಮಲಗಿಸಿ……!? ಅಥವಾ ಓ.ಟಿ. ಒಳಗೆ ಕರೆದೊಯ್ದು ತಮ್ಮ ಪಾಡಿಗೆ ತಾವು ಟೈಂ ಪಾಸ್ ಮಾಡಿ ಹೊರಬರುತ್ತಿದ್ದರೆ? ಯಾರು ಉತ್ತರಿಸುವರು ಹೇಳಿ?  ವೈದ್ಯರು ಯಾಕೆ ಹೀಗೆ ಮಾಡ್ತಾರೆ? ಕಂಡವರ ಜೀವಕ್ಕೆ, ಅವರ ದುಡ್ಡಿಗೆ ಬೆಲೆಯೇ ಇಲ್ವಾ?

ಹಾಗಂತ ವೈದ್ಯರೆಲ್ಲ ಕೆಟ್ಟವರು, ಅಂತ ನಾನು ಹೇಳ್ತಿಲ್ಲ. ವೈದ್ಯ ವೃತ್ತಿಗೊಂದು ಘನತೆ ತಂದುಕೊಟ್ಟು ಮಾನವೀಯತೆ ಮೆರೆಯುತ್ತಿರುವ ಸಾಕಷ್ಟು ಜನರು ನಮ್ಮೊಂದಿಗಿದ್ದಾರೆ. ಅವರ ಬಗ್ಗೆ ಮತ್ತೆಂದಾದರೂ ಹೇಳುವೆ. ಆದರೆ ಅಂಥವರ ಸಂಖ್ಯೆ ಬೆರಳೆಣಿಕೆಯಷ್ಟು ಎನ್ನುವುದೇ ಖೇದದ ಸಂಗತಿ.

ಇವತ್ತಿನ ಪತ್ರಿಕೆಯಲ್ಲೊಂದು ಮತ್ತೊಂದು ಸುದ್ದಿ. ಗ್ರಾಮೀಣ ಸೇವೆ ಕಡ್ಡಾಯ ವಿರೋಧಿಸಿ ವೈದ್ಯ ವಿದ್ಯಾರ್ಥಿಗಳು ಧರಣಿ ಮಾಡಿದ ಕುರಿತು… ಅದಕ್ಕೆ ಪ್ರತಿಕ್ರಿಯೆ ಕೂಡ ನೀಡಲಾಗದಷ್ಟು ಮನಸ್ಸು ಮುರಿದುಹೋಗಿದೆ. ವೈದ್ಯಕೀಯ ಸೇವೆ ಅನ್ನುವುದು, ಹಣ ಮಾಡುವ ದಂಧೆಯಾಗಿದ್ದು ಯಾವಾಗ?

ಇರಲಿ. ಇವತ್ತು ನಾನು ಮತ್ತೆ ಇವೆಲ್ಲವನ್ನೂ ಬರೆಯಲು ಕಾರಣವಿದೆ.
ಹಿಂದಿನ ಲೇಖನದಲ್ಲಿ ನಾನು ಉಲ್ಲೇಖಿಸಿದ್ದ ನನ್ನ ಪ್ರೀತಿಯ ಮೇಷ್ಟ್ರು ನಮ್ಮನ್ನಗಲಿ ಹೋಗಿಬಿಟ್ಟರು.
ಆಪರೇಷನ್ನು, ಅದಕ್ಕೆ ದುಡ್ಡು ಹೊಂದಿಸುವ ಪೀಕಲಾಟ, ಜೀವ ಬಾಯಿಗೆ ತರುವ ಬಿಕ್ಕಳಿಕೆ… ಇವೆಲ್ಲವನ್ನೂ ಬಿಟ್ಟು ನಡೆದುಬಿಟ್ಟರು. ಒಂದು ತಿಂಗಳ ಅವಧಿಯಲ್ಲಿ ನಡೆದ ಈ ದುರಂತಕ್ಕೆ ಅವರ ಕುಟುಂಬ ಭರಿಸಿದ್ದು (ವ್ಯಯಿಸಿದ್ದು ಅನ್ನದೆ ವಿಧಿ ಇಲ್ಲ) ಬರೋಬ್ಬರಿ ನಾಲ್ಕು ಲಕ್ಷ ರೂಪಾಯಿಗಳು!

ಈಗ ತಾನೇ ಅವರ ಅಂತ್ಯ ಸಂಸ್ಕಾರ ಮುಗಿಸಿ ಬಂದೆ. ನಿಮ್ಮೆದುರು ನೋವು ಹಂಚಿಕೊಳ್ಳಬೇಕನಿಸಿತು. ಅಷ್ಟೇ…